ಬೀದರ್ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ರಾಜಕೀಯ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಪ್ರವಾಸ ಮಾಡುತ್ತಿದ್ದು ಶತಾಯ ಗತಾಯ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿವೆ. ಕರ್ನಾಟಕದಲ್ಲಿ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿರುವ ಬಿಜೆಪಿಗೆ ದೆಹಲಿ ಹೈಕಮಾಂಡ್ ಭಾರೀ ಸಪೋರ್ಟ್ ಮಾಡುತ್ತಿದೆ. ಬಿಜೆಪಿ ಕೇಂದ್ರ ನಾಯಕರು ಪದೇ ಪದೇ ರಾಜ್ಯಕ್ಕೆ ಪ್ರವಾಸ ಮಾಡುತ್ತಿದ್ದು ಇಂದು ಮತ್ತು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿ ಠಿಕಾಣಿ ಹೂಡಲಿದ್ದಾರೆ. ಬೀದರ್ ಹಾಗೂ ಬೆಂಗಳೂರು ಜಿಲ್ಲೆ ಪ್ರವಾಸಕ್ಕೆಂದು ತಡರಾತ್ರಿಯೇ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಇಂದು ಬಸವಕಲ್ಯಾಣದಿಂದ ಆರಂಭಗೊಳ್ಳುವ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ತಡರಾತ್ರಿ 2:30ರ ಸುಮಾರಿಗೆ ಬೀದರ್ಗೆ ಬಂದಿಳಿದ ಅಮಿತ್ ಶಾ ಇಂದು ಬೆಳಗ್ಗೆ 11:40ರ ಸುಮಾರಿಗೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಅಮಿತ್ ಶಾ ಬೀದರ್ ಏರ್ಫೋರ್ಸ್ ಗೆಸ್ಟ್ ಹೌಸ್ನಲ್ಲಿ ತಂಗಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶ್ರೀರಾಮುಲು ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಬೀದರ್ಗೆ ಆಗಮಿಸಿದ್ದಾರೆ.
ಇಂದು 11:30ಕ್ಕೆ ಗುರುನಾನಕ್ ಝೀರಾಗೆ ಭೇಟಿ ನೀಡಲಿರುವ ಅಮಿತ್ ಶಾ ಬಳಿಕ 11:40ಕ್ಕೆ ಬೀದರ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಸವಕಲ್ಯಾಣಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12:10ಕ್ಕೆ ಸರಿಯಾಗಿ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದಾರೆ . 12:30ಕ್ಕೆ ಅಮಿತ್ ಶಾ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. 12:45ಕ್ಕೆ ತೇರು ಮೈದಾನಕ್ಕೆ ತೆರಳಲಿರುವ ಅಮಿತ್ ಶಾ 1:15ಕ್ಕೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹುಮನಾಬಾದ್ನಲ್ಲಿ ಅಮಿತ್ ಶಾಗೆ ರೋಡ್ ಶೋ ಆಯೋಜಿಸಲಾಗಿದೆ. ಇದಾದ ಬಳಿಕ ಬೀದರ್ನಿಂದ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿಯಲಿದ್ದಾರೆ.
ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ರಣಬೈರೇಗೌಡರ ಹುಟ್ಟೂರು ಆವತಿಗೆ ತೆರಳಿ ಆವತಿ ಚೆನ್ನಕೇಶವ ಸ್ವಾಮಿ ದೇಗುಲದ ದರ್ಶನ ಪಡೆಯಲಿದ್ದಾರೆ. ರಣ ಬೈರೇಗೌಡ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ಪೂರ್ಣಗೊಳಿಸಿದ ಬಳಿಕ ಜ್ಯೂನಿಕರ್ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಇಂದು ದೇವನಹಳ್ಳಿಯಿಂದ ಆರಂಭವಾಗಲಿರುವ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ನಾಲ್ಕನೇ ರಥಕ್ಕೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ.